ಉಡುಪಿ: ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಮತ್ತೋರ್ವ ಯುವತಿ‌ ಮೃತಪಟ್ಟಿದ್ದು, ಮೃತರ ಸಂಖ್ಯೆ ಮೂರಕ್ಕೆ ಏರಿದೆ.

ಗಂಭೀರ ಸ್ಥಿತಿಯಲ್ಲಿದ್ದ ಮೈಸೂರಿನ ದಿಶಾ (26) ಎಂಬವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಶಂಕರಪ್ಪ (22) ಮತ್ತು ಸಿಂಧು (23) ಅವರು ಸೋಮವಾರ ಮೃತಪಟ್ಟಿದ್ದರು.

ಘಟನೆ ವಿವರ:
ರೆಸಾರ್ಟ್ ರೊಂದರಲ್ಲಿ ಉಳಿದಿದ್ದ 14 ಮಂದಿ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇವರ ಪೈಕಿ ಕೆಲವರು ಲೈಫ್ ಜಾಕೆಟ್ ಧರಿಸಿರಲಿಲ್ಲ. ಸಮುದ್ರ ಮಧ್ಯೆ ದೋಣಿ ಅಕಸ್ಮಿಕವಾಗಿ ಮುಳುಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದಿದ್ದಾರೆ.

ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ, ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಇಬ್ಬರು ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇಂದು ದಿಶಾ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.