ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ‌.

ಶಾಸಕರಿಗೆ ಜೀವ ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಗೂ ‘ತಲೆ ಬೇಕು’ ಎಂಬ ಅರ್ಥ ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪ್ರಸಾದ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್‌ ಹಾಕಿರುವ ಹಿನ್ನೆಲೆ, ಅದರ ಉದ್ದೇಶ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.