ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ 365 ಸೀಯಾಳ (ಎಳನೀರು) ಅಭಿಷೇಕ ನೆರವೇರಿಸಲಾಯಿತು.

ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉತ್ತಮ ಮಳೆಯಾಗಿ ಕೃಷಿ ಮತ್ತು ಜನಜೀವನ ಸುಗಮವಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಅಭಿಷೇಕದ ಬಳಿಕ ದೇವರಿಗೆ ಮಹಾಪೂಜೆ ಹಾಗೂ ಪ್ರಾರ್ಥನೆ ನಡೆಯಿತು. ವಿಶೇಷವೆಂದರೆ, ಸೀಯಾಳ ಅಭಿಷೇಕ ನಡೆಯುತ್ತಿದ್ದ ಸಂದರ್ಭದಲ್ಲೇ ದೇವಾಲಯದ ಸುತ್ತಮುತ್ತ ಜೋರಾಗಿ ಮಳೆ ಸುರಿದಿದ್ದು, ಇದನ್ನು ಕಂಡ ಭಕ್ತರು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.

