ಕುಂದಾಪುರ: ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಸೈನ್‌ ಇನ್‌ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ.

ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ 2.46ರ ವೇಳೆಗೆ ಇಬ್ಬರು ವ್ಯಕ್ತಿಗಳು ಎದುರಿನ ಬಾಗಿಲಿನ ಬೀಗ ಮುರಿದು ಬದಿಯ ಬಾಗಿಲ ಮೂಲಕ ನುಗ್ಗಿ ಮೂರು ಹಸುಗಳ ಹಗ್ಗವನ್ನು ಕತ್ತಿಯಿಂದ ಕಡಿದು ಸಾಗಾಟಕ್ಕೆ ಯತ್ನಿಸಿದ್ದರು.

ದೇವಸ್ಥಾನದ ವತಿಯಿಂದ ಸೈನ್‌ ಇನ್‌ ಸೆಕ್ಯುರಿಟೀಸ್‌ ಸಂಸ್ಥೆಯ ಲೈವ್‌ ಮಾನಿಟರಿಂಗ್‌ ಸಿಸಿಟಿವಿ ಹಾಕಿಸಲಾಗಿದ್ದು ಈ ಸಂಸ್ಥೆ 24 ತಾಸು ಸಿಸಿಟಿವಿ ಮೇಲೆ ನೇರ ನಿಗಾ ಇಟ್ಟು ಪೊಲೀಸ್‌ ಇಲಾಖೆಗೆ ಇಂತಹ ಕಳ್ಳತನ, ಅನುಮಾನಾಸ್ಪದ ವ್ಯಕ್ತಿಗಳ ಓಡಾಟ, ಸಂಶಯಾಸ್ಪದ ಚಟುವಟಿಕೆಗಳ ಮಾಹಿತಿಯನ್ನು ತತ್‌ಕ್ಷಣ ನೀಡುತ್ತದೆ.

ಭದ್ರತಾ ವಿಭಾಗ ದವರು ಕೂಡಲೇ ಗೋಶಾಲೆಗೆ ಹೋದಾಗ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದಾರೆ.

ನಾಪತ್ತೆ ಯಾಗಿದ್ದ ಒಂದು ದನ ಸಮೀಪದಲ್ಲಿ ಹೊರಗಿದ್ದು ಉಳಿದ ಎಲ್ಲ ದನಗಳೂ ಅಲ್ಲಿಯೇ ಸುರಕ್ಷಿತವಾಗಿದ್ದವು. ಎಸ್‌ಐ ಹಾಗೂ ಕುಂದಾಪುರ ಡಿವೈಎಸ್‌ಪಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು ಕಾರಿನ ಮೂಲಕ ಬಂದವರ ಮಾಹಿತಿ ಕಲೆ ಹಾಕಿದ್ದಾರೆ.