ಉಡುಪಿ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ಭಾನುವಾರ ರಾತ್ರಿ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಈ ಮೊದಲು ಕೂಡ ರಾಜು ತಾಳಿಕೋಟೆ ಅವರಿಗೆ ಹೃದಯಾಘಾತ ಆಗಿತ್ತು. ಆಗ ಚಿಕಿತ್ಸೆ ನೀಡಿ ಸ್ಟಂಟ್ ಹಾಕಲಾಗಿತ್ತು. ಈಗ ಒತ್ತಡ ಜಾಸ್ತಿ ಆಗಿದ್ದರಿಂದ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು. ವಿಜಯಪುರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ರಾಜು ತಾಳಿಕೋಟೆ ಅವರು ಸಕ್ರಿಯರಾಗಿದ್ದರು. ‘ಮನಸಾರೆ’, ‘ಪಂಚರಂಗಿ’, ‘ಲೈಫು ಇಷ್ಟೇನೇ’, ‘ರಾಜಧಾನಿ’, ‘ಅಲೆಮಾರಿ’, ‘ಮೈನಾ’, ‘ಟೋಪಿವಾಲಾ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 7’ ರಿಯಾಲಿಟಿ ಶೋನಲ್ಲಿ ಅವರು ಸ್ಪರ್ಧಿಸಿದ್ದರು.
ಕಿರುತೆರೆಯ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು.

