ಭಟ್ಕಳ : ಮೀನುಗಾರನೊಬ್ಬ ಸಮುದ್ರಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಮಾವಿನಕುರ್ವೆ ಬಂದರ್ ಸಮೀಪ ಗುರುವಾರ ಬೆಳಿಗ್ಗೆ ನಡೆದಿದೆ.

ಮೃತ ಮೀನುಗಾರನನ್ನು ಶ್ರೀಧರ್ ಪರಮೇಶ್ವರ ಖಾರ್ವಿ ಎಂದು ಗುರುತಿಸಲಾಗಿದೆ. ಶ್ರೀಧರ್ ಅವರು ಮಾವಿನಕುರ್ವೆ ಬಂದರ್‌ನಿಂದ ಸುಮಾರು 15 ಕಿಲೋಮೀಟರ್ ದೂರದ ಸಮುದ್ರದೊಳಗೆ ಮೀನುಗಾರಿಕೆಗೆ ತೆರಳಿದ್ದರು.

ಬಲೆ ಎಳೆಯುವ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದ ಅವರು ತೀವ್ರ ಗಾಯಗೊಂಡು ಪ್ರಾಣ ಕಳೆದುಕೊಂಡರು ಎಂದು ಮೂಲಗಳು ತಿಳಿಸಿವೆ.

ಸಹ ಮೀನುಗಾರರು ಅವರನ್ನು ತಕ್ಷಣವೇ ತೀರಕ್ಕೆ ಕರೆತಂದು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.