ಮಂಗಳೂರು: ನಾಗೋರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆ ಹಿಂಭಾಗದ ನಾಗೋರಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ.

ಹಠಾತ್ ಗುಡ್ಡ ಕುಸಿದು ಹಂಚಿನ ಮನೆ ಮೇಲೆ ಬಿದ್ದ ಪರಿಣಾಮ ಅವಶೇಷಗಳಡಿ ಒಂದೇ ಕುಟುಂಬದ 6 ಮಂದಿ ಸಿಲುಕಿದ್ದಾರೆ. ದುರಂತದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣುಮಕ್ಕಳು ಸೇರಿ
ಒಟ್ಟು ಮೂವರ ದಾರುಣ ಸಾವನ್ನಪ್ಪಿದ್ದಾರೆ.
ಮೃತರ ದೇಹವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಸಾರ್ವಜನಿಕರು ಹಾಗೂ ರಕ್ಷಣಾ ತಂಡದ ತಕ್ಷಣದ ಕಾರ್ಯಾಚರಣೆ ಕೈಗೊಂಡಿದೆ. ಅವಶೇಷಗಳಡಿಯಿಂದ ಓರ್ವ ಪುರುಷ, ಇಬ್ಬರು ಯುವತಿಯರ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯಿತು.
ಸದ್ಯ 6 ಜನರ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ರಕ್ಷಣೆಯೊಂದಿಗೆ ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿದ್ದಾರೆ. ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಗುಡ್ಡದ ಪಕ್ಕದಲ್ಲಿರುವ ನಿವಾಸಿಗಳು ಜಾಗರೂಕರಾಗಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

