ಮಂಗಳೂರು : ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಈ ಕಾಯ್ದೆಯಡಿ ಪ್ರಕರಣ ದಾಖಲಾದರೆ ಜಾಮೀನು ಸಿಗುವುದು ಕಷ್ಟ. ಮೇ 27ರಂದು ಅಬ್ದುಲ್ ರಹ್ಮಾನ್ ಅವರನ್ನು ಕೊಲೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್., ಶಿವಪ್ರಸಾದ್ ತುಂಬೆ, ಪ್ರದೀಪ , ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಪುದು ಗ್ರಾಮದ ಭರತ್ ರಾಜ್ ಯಾನೆ ಭರತ್ ಕುಮ್ಡೇಲು (29) ಎಂಬಾತ ತಲೆ ಮರೆಸಿಕೊಂಡಿದ್ದು, ಆತನ ಬಂಧನವಾಗಲು ಬಾಕಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆಯತ್ನ, ಪ್ರಚೋದನಕಾರಿ ಭಾಷಣಗಳು ಸಹಿತ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ. ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT& 2000) ರಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.