ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರದ ವಿರುದ್ದ ಜನಜಾಗೃತಿ ಹಾಗೂ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎನ್ನುವ ಸಂದೇಶ ಸಾರಲು ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮಂಡಲಗಳಿಂದ ಸೋಮವಾರ ಅಪರಾಹ್ನ ಧರ್ಮ ಜಾಗೃತಿ ಯಾತ್ರೆ ನಡೆದಿದ್ದು ಬಂಟ್ವಾಳದ ಯಾತ್ರೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಧರ್ಮಸ್ಥಳ ಸಾವಿರಾರು ವರ್ಷಗಳ ಇತಿಹಾಸವುಳ್ಳ ಶ್ರದ್ಧಾ ಕೇಂದ್ರವಾಗಿದ್ದು, ಅಪನಂಬಿಕೆ ಯ ವಿರುದ್ದ ಹಿಂದೂಗಳೆಲ್ಲರೂ ಒಟ್ಟಾಗಿ ಶ್ರೀಕ್ಷೇತ್ರಕ್ಕೆ ಶಕ್ತಿ ತುಂಬುವ ಸಲುವಾಗಿ ಭಾರತೀಯ ಜನತಾ ಪಾರ್ಟಿ ಹಾಗೂ ಪರಿವಾರ ಸಂಘಟನೆಗಳು ಈ ಯಾತ್ರೆ ಹಮ್ಮಿಕೊಂಡಿದೆ ಎಂದರು. ಬಿಜೆಪಿ ಮುಖಂಡ ದೇವದಾಸ ಶೆಟ್ಟಿ ಮಾತನಾಡಿ, ಬಂಟ್ವಾಳ ತಾಲೂಕಿನ ೧೦೦ ವಾಹನಗಳು ಈ ಧರ್ಮ ಜಾಗೃತಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ ಎಂದರು.
ಮಾಜಿ ಶಾಸಕ ರುಕ್ಮಯ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಪ್ರಮುಖರಾದ ವಿಶ್ವಾಸ್ ಪುತ್ತೂರು, ಹರಿಕೃಷ್ಣ ಬಂಟ್ವಾಳ, ಸುಲೋಚನಾ ಭಟ್, ಸರಪಾಡಿ ಅಶೋಕ್ ಶೆಟ್ಟಿ, ಮೋನಪ್ಪ ದೇವಸ್ಯ, ಶ್ರೀಕಾಂತ್ ಶೆಟ್ಟಿ, ರಾಮದಾಸ್ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.

