ಬೆಳ್ತಂಗಡಿ: ಕಾರ್ಯಾಚರಣೆಯ ವೇಳೆ ಇಂದು ಗುರುವಾರ ಆರನೇ ಸ್ಥಳದಲ್ಲಿ ಉತ್ಖನನ ಮಾಡುವ ವೇಳೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ 3ನೇ ದಿನದ ಶೋಧ ಕಾರ್ಯದ ವೇಳೆ ಕೆಲವು ಅವಶೇಷಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗುತ್ತಿದೆ. ಆದರೆ ಈ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ದೂರುದಾರ ಗುರುತಿಸಿರುವ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ ಆರನೇ ಸ್ಥಳದಲ್ಲಿ ಅಗೆಯುವ ವೇಳೆ ಕೆಲವು ಎಲುಬಿನ ಚೂರುಗಳು ಲಭಿಸಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ಎಸ್ಐಟಿ ಅಧಿಕಾರಿಗಳು ಗುರುವಾರ ದೂರುದಾರ ಗುರುತಿಸಿರುವ 13 ಸ್ಥಳಗಳ ಪೈಕಿ ನೇತ್ರಾವತಿ ನದಿಯ ಬದಿಯಲ್ಲಿರುವ 6ನೇ ಜಾಗದಲ್ಲಿ ಅಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಮೊದಲು ಎರಡು ದಿನಗಳಲ್ಲಿ ಸಾಕ್ಷಿ ದೂರುದಾರ ಗುರುತಿಸಿದ್ದ ಐದು ಜಾಗಗಳಲ್ಲಿ ಎಸ್ಐಟಿ ಅಗೆದ ವೇಳೆ ಮೃತದೇಹದ ಯಾವುದೇ ಅವಶೇಷಗಳು ಸಿಕ್ಕಿರಲಿಲ್ಲ. ಕಾರ್ಯಾಚರಣೆಯ 3ನೇ ದಿನವಾದ ಗುರುವಾರ ಆರನೇ ಸ್ಥಳದಲ್ಲಿ ಉತ್ಖನನ ಮಾಡುವ ವೇಳೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.