ಮಂಗಳೂರು : ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹಸವಾರೆ ರಸ್ತೆಗೆ ಬಿದ್ದು, ಆಕೆಯ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎಂ.ಆರ್.‌ಪಿ.ಎಲ್‌. ಕಾರ್ಗೋ ಗೇಟ್ ಬಳಿ ಬುಧವಾರ ಮಧ್ಯಾಹ್ನ ವರದಿಯಾಗಿದೆ.

ಮೃತರನ್ನು ಉತ್ತರ ಕನ್ನಡ ಮೂಲದ ಪ್ರಸ್ರುತ ಕಾಟಿಪಳ್ಳ ಕೈಕಂಬದಲ್ಲಿ ವಾಸವಿರುವ ಶ್ವೇತಾ (20) ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಅವರ ಸಹೋದರ ಸಣ್ಣಪುಟ್ಟ ಗಾಯಗಳಿಂದ ಪ್ರಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಶ್ವೇತಾ ಅವರು ಕಾಟಿಪಳ್ಳ ಕೈಕಂಬದಿಂದ ಸುರತ್ಕಲ್ ಕಡೆಗೆ ತನ್ನ ಸಹೋದರನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ‌. ಈ ವೇಳೆ ರಸ್ತೆಗೆ ಬಿದ್ದ ಶ್ವೇತಾ ಅವರ ಮೇಲೆ ಲಾರಿ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ‌. ಘಟನೆ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ‌.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.