ನಂಜನಗೂಡು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ತಹಶೀಲ್ದಾರ್ ಕಛೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ಶಾಸಕರು ಹಾಗೂ ತಹಶೀಲ್ದಾರ್ ಗೈರುಹಾಜರಾಗಿದ್ದಕ್ಕೆ ದಲಿತ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಂಗವಾಗಿ ಸಂವಿಧಾನದ ಪೀಠಿಕೆಯ ಭಾವಚಿತ್ರ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಸಭೆ ಆರಂಭವಾಗುತ್ತಿದ್ದಂತೆ ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ದಿನಾಚರಣೆಗೆ ಸಮರ್ಪಕವಾಗಿ ಆಹ್ವಾನ ನೀಡದೆ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಪಿತಾಮಹರಿಗೆ ಗೌರವ ಸಲ್ಲಿಸುವ ದಿನದಂದೇ ಜವಾಬ್ದಾರಿಯುತ ಅಧಿಕಾರಿಗಳು ಗೈರಾಗಿರುವುದು ಖಂಡನೀಯ. ಗೈರುಹಾಜರಾದ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಬಸವಣ್ಣ ಹಾಗೂ ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ವಿಜಯಕುಮಾರ್ ಆಗ್ರಹಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳೇ ಕಾರ್ಯಕ್ರಮಕ್ಕೆ ಗೈರಾಗಿರುವುದು ಸರಿಯಲ್ಲ. ಇಂತಹ ನಡೆ ಪ್ರಜಾಪ್ರಭುತ್ವದ ಮೇಲಿನ ಅವರ ಬದ್ಧತೆಯನ್ನೇ ಪ್ರಶ್ನಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ತಹಶೀಲ್ದಾರ್ ಗ್ರೇಡ್–2 ನಂದಕಿಶೋರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗು, ಕಂದಾಯ ಆಡಳಿತ ಅಧಿಕಾರಿ ರಾಜು, ದಸಂಸ ಸಂಚಾಲಕ ಶಂಕರಪುರ ಸುರೇಶ್, ಹಗಿನವಾಳು ಚಿಕ್ಕಣ್ಣ, ದೇವರಸನಹಳ್ಳಿ ಪುಟ್ಟಸ್ವಾಮಿ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

