ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.
ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಇರ್ತಾರೆ. ಸದ್ಯಕ್ಕೆ ಬದಲಾವಣೆ ಚರ್ಚೆ ನಡೆದಿಲ್ಲ ಎಂದು ನುಡಿದಿದ್ದಾರೆ. ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿಲ್ಲ. ನನಗೆ ಗೊತ್ತಿಲ್ಲದೆ ಯಾವ ಚರ್ಚೆಯೂ ನಡೆಯಲು ಸಾಧ್ಯವಿಲ್ಲ. ಪರಮೇಶ್ವರ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದು ತಿಳಿಸಿದ್ದಾರೆ.

