ಮೈಸೂರು : ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ದಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ ಬಹಿರಂಗ ಪಡಿಸಿಲ್ಲ. ಬೆಂಗಳೂರು ಕಾಲ್ತುಳಿತ ಘಟ‌ನೆಯಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ 11 ಯುವಜನರು ಸಾವನ್ನಪ್ಪಿದ್ದಾರೆ.

ಇದರಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ, ಜನರ ದಿಕ್ಕು ತಪ್ಪಿಸಲು ಮರು ಜಾತಿಗಣತಿಗೆ ಮುಂದಾಗಿದೆ. 90 ದಿನದಲ್ಲಿ ಮರು ಜಾತಿಗಣತಿ ನಡೆಸಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಉಳಿಸಲು ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗಗಳ ಹಿತವನ್ನು ಬಲಿಕೊಟ್ಟಿದೆ.

ಈಗಾಗಲೇ ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸುವಂತೆ ಸೂಚಿಸಿದೆ. ಹಾಗಾಗಿ ರಾಜ್ಯದಲ್ಲಿ ಮರು ಜಾತಿಗಣತಿ ‌ನಡೆಸುವ ಅವಶ್ಯಕತೆ ಇಲ್ಲ. ರಾಜ್ಯದ ಜಾತಿಗಣತಿ ವಿಚಾರವನ್ನು ರಾಹುಲ್ ಗಾಂಧಿ, ವೇಣುಗೋಪಾಲ್ ನಿರ್ಧರಿಸಲು ಮುಂದಾಗಿದ್ದು ಸರಿಯಲ್ಲ. ಮರು ಜಾತಿಗಣತಿ ನಡೆಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.