ನಂಜನಗೂಡು: ಸಾರ್ವಜನಿಕರ ಕುಂದುಕೊರತೆಗಳನ್ನು ಅಧಿಕಾರಿಗಳು ಆಲಿಸಿ, ಆದಷ್ಟು ಬೇಗ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡಿ, ವರುಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನು ಅಭಿವೃದ್ಧಿ ಪಡಿಸುವುದು ನನ್ನ ಗುರಿ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾ.ಪಂ ವ್ಯಾಪ್ತಿಯ ಜಿ. ಮಾರಹಳ್ಳಿ ಗ್ರಾಮದಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಿ, ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಈಗಾಗಲೇ ನಾಲೆಯ ಅಭಿವೃದ್ಧಿಗೆ 4.5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, 2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಮಹದೇಶ್ವರ ದೇವಾಲಯ, ಚೌಡೇಶ್ವರಿ ದೇವಾಲಯ ಹಾಗೂ ಬಸವ ಭವನ ನಿರ್ಮಾಣಕ್ಕೆ ತಲಾ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಗ್ರಾಮದ ಮಾರಮ್ಮನ ದೇವಾಲಯಕ್ಕೆ 3 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ನಾಲೆ ನಿರ್ಮಾಣಕ್ಕಾಗಿ 20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ನಾಲೆ ಮತ್ತು ಕಾಲುವೆ ಅಭಿವೃದ್ಧಿ ಪಡಿಸುವುದರಿಂದ ಸುಮಾರು 15 ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ. ಜಿ.ಮಾರಹಳ್ಳಿ ಗ್ರಾಮದಲ್ಲೇ ಸುಮಾರು 10 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಡೆಯುತ್ತಿರುವ ಕಾಮಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇನ್ನೂ ಪರಿಶಿಷ್ಟ ಜಾತಿಯ ಹೊಸ ಬಡಾವಣೆಗೆ ರಸ್ತೆ, ವಿದ್ಯುತ್ ಸಂಪರ್ಕ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಕೊಡಿ ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು. ನಂತರ ಮಾಜಿ ಗ್ರಾಪಂ ಅಧ್ಯಕ್ಷ ಜಗದೀಶ್ವರ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ರವರಿಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಚೆಸ್ಕಾಂ ಎಇಇ ದೇವರಾಜಯ್ಯ,
ಗ್ರಾ.ಪಂ. ಮಾಜಿ ಅಧ್ಯಕ್ಷ ಜಗದೀಶ್ವರ, ಮಾಜಿ ಅಧ್ಯಕ್ಷ ಸೋಮಣ್ಣ, ಸಾಹುಕಾರ್, ಶಿವಪ್ರಸಾದ್, ಮಲ್ಲಣ್ಣ, ಸುರೇಶ್, ದಕ್ಷಿಣ ಮೂರ್ತಿ, ಗುರುಪಾದ, ಮಹದೇವಸ್ವಾಮಿ, ಮಾಯ, ಶಿವು, ಅಭಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.