ನಂಜನಗೂಡು: ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ 3 ವರ್ಷಗಳು ಕಳೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಗರ್ಲೆ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ.
ಅಂಬೇಡ್ಕರ್ ರವರ ಪ್ರತಿಮೆ ನಿರ್ಮಾಣ ಮಾಡಿಲ್ಲ. ಕಾಂಗ್ರೆಸ್ ಮುಖಂಡರು ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ಗ್ರಾಮಸ್ಥರು ರೊಚ್ಚಿಗೆದ್ದು ಕಾಂಗ್ರೆಸ್ ಮುಖಂಡರಿಗೆ ನಿರ್ಬಂಧ ವಿಧಿಸಿದ್ದಾರೆ.
ಗ್ರಾಮದ ರಾಜ್ಯ ಹೆದ್ದಾರಿಯ ರಸ್ತೆಗಳಲ್ಲಿ ಮತ್ತು ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಾಮಫಲಕ ಅಳವಡಿಸಿ ಕಾಂಗ್ರೆಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು ನಾಮರ್ಧರು ಆದಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ನಾಮಫಲಕವನ್ನು ಅಳವಡಿಸಿ ಗ್ರಾಮಸ್ಥರು ನಿರ್ಬಂಧ ವಿಧಿಸಿದ್ದಾರೆ.

