ರಾಯಚೂರು: ಶಾಲಾ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 40ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

ಸಮರ್ಥ (7) ಹಾಗೂ ಶ್ರೀಕಾಂತ (12) ಮೃತ ವಿದ್ಯಾರ್ಥಿಗಳು. ಅಪಘಾತ ಸಂಭವಿಸಿದ ಕೂಡಲೇ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡ 40ಕ್ಕೂ ಹೆಚ್ವು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

40 ಜನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಶಾಲಾ ಬಸ್ಸಿನಲ್ಲಿದ್ದ 17 ಜನರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ಕು ವಿದ್ಯಾರ್ಥಿಗಳ ಕಾಲುಗಳು ತುಂಡಾಗಿವೆ. 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 17 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಯಚೂರು ಜಿಲ್ಲಾಧಿಕಾರಿ ನಿತೀಶ್.ಕೆ ಈ ಘಟನೆ ಕುರಿತು ಸಿಎಂ ಜೊತೆ ದೂರವಾಣಿಯಲ್ಲಿ ಮಾತನಾಡಿ, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆಗೆ ಪರಿಹಾರ ನೀಡಲು ಸೂಚಿಸಿದ್ದಾರೆ. ಕೂಡಲೇ ಪರಿಹಾರ ಒದಗಿಸಲು ಆದೇಶ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿಯಿಂದ ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡ ಗಾಯಾಳುಗಳಿಗೆ 3 ಲಕ್ಷ ರೂ. ಪರಿಹಾರ ಕೊಡಿಸಲಾಗುವುದು. ಚಿಕಿತ್ಸೆಗೆ ಇಲ್ಲಿ ವ್ಯವಸ್ಥೆ ಇಲ್ಲದಿದ್ದರೆ ಬೇರೆಕಡೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆ ಮರುಕಳಿದಂತೆ ಎಚ್ಚರಿಕೆ ನೀಡಲು ಸೂಚಿಸಿದ್ದಾರೆ.