ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವ ಹೊತ್ತಿನಲ್ಲಿ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಚುನಾವಣಾ ಪ್ರಣಾಳಿಕೆ ಜನತಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಬಿ ಎಂ ಫಾರೂಕ್, ಪಕ್ಷದ ಕಾರ್ಯಾಧ್ಯಕ್ಷ ಅಲ್ಕೋಡ್ ಹನುಮಂತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ವರ್ಷಕ್ಕೆ ಐದು ಅಡುಗೆ ಅನಿಲ ಸಿಲಿಂಡರ್ ನೀಡುವುದಾಗಿ ಜೆಡಿಎಸ್ ಘೋಷಿಸಿದೆ. ಮಾತೃಶ್ರೀ ಮತ್ತು ಗರ್ಭಿಣಿ ತಾಯಂದಿರ ಅಗತ್ಯತೆ ಪೂರೈಸಲು 6 ತಿಂಗಳ ಕಾಲ 6 ಸಾವಿರ ರೂಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿದೆ. ವಿಧವಾ ವೇತನವನ್ನು 900 ರೂಪಾಯಿಗಳಿಂದ 2,500 ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಜೆಡಿಎಸ್ ಹೇಳಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ 11,000 ರೂ., ಸಹಾಯಕಿಯರಿಗೆ 6,500 ರೂ., ಈ ಕಾರ್ಯಕರ್ತರ ಸೇವೆಯನ್ನು ಖಾಯಂಗೊಳಿಸಿ, ವೇತನ ನಿಗದಿಗೊಳಿಸಿ ಪ್ರತಿ ಕಾರ್ಯಕರ್ತೆಯರಿಗೆ ಮಾಸಿಕ ಹೆಚ್ಚುವರಿಯಾಗಿ 5000 ರೂ. ವೇತನ ಪಾವತಿಸಲಾಗುವುದು. ಅದೇ ರೀತಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತೆಯರಿಗೆ ಪಿಂಚಣಿಯೋಜನೆ ಜಾರಿಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದೆ.