ಬೆಂಗಳೂರು: 2024 ರ ಲೋಕಸಭೆ ಚುನಾವಣೆಗೆ ಜನತಾ ದಳ-ಜಾತ್ಯತೀತ (ಜೆಡಿ-ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ಮೈತ್ರಿ ವದಂತಿಗಳ ನಡುವೆ, ಮಾಜಿ ಪ್ರಧಾನಿ ಮತ್ತು ಜೆಡಿ-ಎಸ್ ಮುಖ್ಯಸ್ಥ ಎಚ್.ಡಿ. ದೇವೆಗೌಡ ಅವರು ರೈಲು ದುರಂತದ ವೇಳೆ ಅಶ್ವಿನಿ ವೈಷ್ಣವ್ ಅವರ ಪ್ರಯತ್ನಗಳನ್ನು ಶ್ಲಾಘಿಸಿರುವುದು ಹೊಸ ಚರ್ಚೆಗೆ ನಾಂದಿ ಹಾಡಿದೆ.
ಭೀಕರ ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ವೈಷ್ಣವ್ ರಾಜೀನಾಮೆಗೆ ಒತ್ತಾಯಿಸಿದ್ದರು. ಆದರೆ ದೇವೆಗೌಡ ಅವರ ಕುರಿತು ಮೆಚ್ಚುಗೆಯ ಮಾತನಾಡಿದ್ದಾರೆ. ಅಶ್ವಿನಿ ವೈಷ್ಣವ್ ಅವರು ದಣಿವರಿಯದೇ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳ ನಡುವೆ ದೇವೆಗೌಡ ಹೇಳಿಕೆ ಮಹತ್ವ ಪಡೆದಿದೆ.
ರೈಲು ದುರಂತದ ವೇಳೆ ವೈಷ್ಣವ್ ಅವರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸಚಿವರು ತಮ್ಮ ಪೂರ್ಣ ಸಾಮರ್ಥ್ಯದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಈ ಹಂತದಲ್ಲಿ ರಾಜೀನಾಮೆಗೆ ಒತ್ತಾಯಿಸುವುದು ಸಮರ್ಥನೀಯವಲ್ಲ” ಎಂದು ದೇವೇಗೌಡ ಹೇಳಿದ್ದರು.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಬಿಜೆಪಿ ಜೊತೆ ಕೈಜೋಡಿಸಿರುವುದು ಬಹಿರಂಗ ರಹಸ್ಯ ಎಂದು ದೇವೇಗೌಡರು ಮಂಗಳವಾರ ಹೇಳಿದ್ದಾರೆ.
ಬಿಜೆಪಿ ಜತೆ ಕೈಜೋಡಿಸದೆ ರಾಜಕೀಯ ಮಾಡಿರುವ ಒಂದು ಪಕ್ಷವನ್ನು ತೋರಿಸಿ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಬೇರೆಯದೇ ಆಯಾಮ ನೀಡಿದೆ.
ವಿವಿಧ ರಾಜ್ಯಗಳ ವಿವಿಧ ಪಕ್ಷಗಳು ಬಿಜೆಪಿಯೊಂದಿಗೆ ಪ್ರತ್ಯಕ್ಷ ಅಥವಾ ಪರೋಕ್ಷ ಒಪ್ಪಂದ ಹೊಂದಿವೆ. ಕಾಂಗ್ರೆಸ್ನ ಹಲವು ನಾಯಕರು ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಈ ವಿಷಯದಲ್ಲಿ ಮುಚ್ಚಿಡಲು ಏನೂ ಇಲ್ಲ ಎಂದು ಅವರು ಹೇಳಿದರು.