ನವದೆಹಲಿ: ನವದೆಹಲಿ ಪ್ರಗತಿ ಮೈದಾನದ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಹಲವು ರಾಜಕೀಯ ಪಕ್ಷಗಳು ಮುಂಬರುವ 2024ರ ಲೋಕಸಭೆ ಚುನಾವಣೆಯತ್ತ ಗಮನಹರಿಸಿವೆ. ಆದರೆ ನಮ್ಮ ಸರ್ಕಾರವು ಮುಂದಿನ 25 ವರ್ಷಗಳಲ್ಲಿ ಭಾರತವು ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವುದನ್ನು ನೋಡಲು 2047 ರ ಮಾರ್ಗಸೂಚಿಯೊಂದಿಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಮುಕ್ತಾಯದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ, ಸಭೆಯಲ್ಲಿ ಪ್ರಧಾನಿಯವರು ದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವಂತೆ ತಿಳಿಸಿದ್ದಾರೆ. ಅಲ್ಲದೆ ಇದುವರೆಗಿನ ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಚರ್ಚಿಸಲಾಯಿತು. 2047ರ ಇಸವಿಯಲ್ಲಿ ಭಾರತ ಅಭಿವೃದ್ಧಿಯಲ್ಲಿ ಏರಬೇಕಾದ ಎತ್ತರದ ಕುರಿತು ಚರ್ಚೆ ನಡೆಸಿದರು ಎಂದು ತಿಳಿಸಿದರು.
ಮೋದಿ ಸರ್ಕಾರದ ವಿದೇಶಾಂಗ ನೀತಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ವಿಷಯ ಮಂಡಿಸಿದರು. ಈ ಬಾರಿಯ ಪ್ರಧಾನಿ ಮೋದಿಯವರ ವಿದೇಶ ಪ್ರವಾಸಗಳು (ಯುಎಸ್ ಮತ್ತು ಈಜಿಪ್ಟ್) ಹಿಂದಿನ ಪ್ರಧಾನಿಗಳಿಗಿಂತ ಹೇಗೆ ಭಿನ್ನವಾಗಿವೆ ಎಂದು ಲೇಖಿ ವಿವರಿಸಿದರು.