ಮ್ಯಾಂಚೆಸ್ಟರ್ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 3ನೇ ಹಾಗೂ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಸದ್ಯ ಸರಣಿ 1-1ರಲ್ಲಿ ಸಮಬಲದಲ್ಲಿದೆ. ಮೊದಲ ಏಕದಿನ ಪಂದ್ಯವನ್ನು ರೋಹಿತ್ ಶರ್ಮಾ ಪಡೆ 10 ವಿಕೆಟ್ಗಳಿಂದ ಗೆದ್ದಿದ್ದರೆ, ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ 100 ರನ್ಗಳ ಭರ್ಜರಿ ಜಯದೊಂದಿಗೆ ಕಮ್ ಬ್ಯಾಕ್ ಮಾಡಿತ್ತು. ಎರಡನೇ ODI ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಪಡೆ ಸಂಪೂರ್ಣ ವಿಫಲತೆ ಕಂಡಿತ್ತು. 246 ರನ್ ಬೆನ್ನಟ್ಟಿದ್ದ ಭಾರತ ಕೇವಲ 146 ರನ್ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು.
ಬೆನ್ನುನೋವಿನಿಂದಾಗಿ ಜಸ್ಪ್ರೀತ್ ಬುಮ್ರಾ ಪಂದ್ಯದಿಂದ ಹೊರಗುಳಿದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಟಾಸ್ ಗೆದ್ದ ನಂತರ ರೋಹಿತ್ ಶರ್ಮಾ ಹೇಳಿದ್ದಾರೆ.
ಅರ್ಷದೀಪ್ (ಸಿಂಗ್) ಅವರು ಇನ್ನೂ ಬಲ ಹೊಟ್ಟೆಯ ಒತ್ತಡದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಆದ್ದರಿಂದ ಈ ಪಂದ್ಯದಲ್ಲಿ ಬೂಮ್ರಾ ಸ್ಥಾನದಲ್ಲಿ ಮೊಹಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.