News Karnataka Kannada
Wednesday, May 08 2024
ಕ್ರೀಡೆ

5ನೇ ಟೆಸ್ಟ್ ಪಂದ್ಯ: ಇಂಗ್ಲೆಂಡ್​ ವಿರುದ್ಧ ಅಭೂತ ಪೂರ್ವ ಗೆಲುವು ಸಾಧಿಸಿದ ಇಂಡಿಯಾ

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ 5ನೇ ಮತ್ತು ಕೊನೆಯ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಅಭೂತ ಪೂರ್ವ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ.
Photo Credit : News Kannada

ಧರ್ಮಶಾಲಾ: ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ 5ನೇ ಮತ್ತು ಕೊನೆಯ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಅಭೂತ ಪೂರ್ವ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ.

ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಬ್ರಿಟಿಷ್ ಕ್ಯಾಪ್ಟನ್ ಬೆನ್​ ಸ್ಟೋಕ್ಸ್​ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಝಾಕ್ ಕ್ರಾಲಿ (79) ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ.

ಕುಲ್ದೀಪ್ ಯಾದವ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಕ್ರೀಸ್​ ಕಚ್ಚಿ ನಿಲ್ಲಲು ಪರದಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 218 ರನ್​ಗಳಿಸಲಷ್ಟೇ ಶಕ್ತರಾದರು.

ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿದರೆ, ಅಶ್ವಿನ್ 4 ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್​ಗೆ ಇಳಿದಿದ್ದ ಭಾರತದ ಆಟಗಾರರು ಬೃಹತ್​ ರನ್​ಗಳನ್ನ ಕಲೆ ಹಾಕಿದ್ದರು. ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 104 ರನ್ ಪೇರಿಸಿ ಜೈಸ್ವಾಲ್ (57) ಔಟಾದರು. ಇನ್ನು ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಭರ್ಜರಿ ಶತಕ ಸಿಡಿಸಿದರು.

ದೇವದತ್ ಪಡಿಕ್ಕಲ್ (65) ಹಾಗೂ ಸರ್ಫರಾಝ್ ಖಾನ್ (56) ಅರ್ಧಶತಕ ಬಾರಿಸಿ ಮಿಂಚಿದರು. ಪರಿಣಾಮ 2ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ ಸ್ಕೋರ್ 450 ರನ್​ಗಳ ಗಡಿ ದಾಟಿತು. ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಕುಲ್ದೀಪ್ ಯಾದವ್ (30) ಹಾಗೂ ಜಸ್​ಪ್ರೀತ್ ಬುಮ್ರಾ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 477 ರನ್ ಕಲೆಹಾಕಿ ಟೀಮ್ ಇಂಡಿಯಾ 259 ರನ್​ಗಳ ಮುನ್ನಡೆ ಪಡೆಯಿತು.

259 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ರವಿಚಂದ್ರನ್ ಅಶ್ವಿನ್ ಆಘಾತ ನೀಡಿದರು. ಪರಿಣಾಮ 103 ರನ್​ ಕಲೆಹಾಕುವಷ್ಟರಲ್ಲಿ ಇಂಗ್ಲೆಂಡ್ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತು ಆಡಿದ ಜೋ ರೂಟ್ (84) ಅರ್ಧಶತಕ ಬಾರಿಸಿದರು.

ಆದರೆ ಮತ್ತೊಂದೆಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಇಂಗ್ಲೆಂಡ್ ತಂಡವು 195 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್ ಹಾಗೂ 64 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಭರ್ಜರಿ ಗೆಲುವಿನ ಮೂಲಕ ಐದು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್,  ಅಶ್ವಿನ್ 5 ವಿಕೆಟ್ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು