ಬೆಂಗಳೂರು: ಸೋಮವಾರ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಅಭಿಮಾನಿಯೋರ್ವ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲಿಗೆ ಬಿದ್ದ ಪ್ರಸಂಗ ಜರುಗಿತ್ತು.
ಆತನ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಇದೀಗ ಆತನಿಗೆ ಸ್ಟೇಡಿಯಂ ಸಿಬ್ಬಂದಿ ಅಮಾನುಷವಾಗಿ ಥಳಿಸಿದ ಘಟನೆ ನಡೆದಿದ್ದು, ತಡವಾಗಿ ಇದು ಬೆಳಕಿಗೆ ಬಂದಿದೆ. ಇದರ ವಿಡಿಯೊ ಈಗ ಎಲ್ಲಡೆ ವೈರಲ್ ಆಗಿದ್ದು. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ರಾಯಚೂರು ಮೂಲದ ಕುರುಮಪ್ಪ ಎನ್ನುವ ಅಭಿಮಾನಿ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಪಿಚ್ ಕಡೆ ಬಂದು ಕೊಹ್ಲಿ ಕಾಲಿಗೆ ಬಿದ್ದು, ಆಲಿಂಗನ ಮಾಡಿದ್ದ. ಕೂಡಲೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಮೈದಾನದಿಂದ ಹೊರಹಾಕಿದ್ದರು. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.
ಆದರೆ ಆ ಬಳಿಕ ಏನು ನಡೆದಿದೆ ಎನ್ನುವ ಘಟನೆ ಈಗ ಬೆಳಕಿಗೆ ಬಂದಿದೆ. ಸೆಲ್ಲಾರ್ಗೆ ಕರೆತಂದ ಭದ್ರತಾ ಸಿಬ್ಬಂದಿ ಆತನಿಗೆ ಸರಿಯಾಗಿ ಥಳಿಸಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಏಟು ತಿಂದ ಆತನಿಗೆ ಸರಿಯಾಗಿ ಎದ್ದು ನಿಲ್ಲಲು ಕೂಡ ಆಗುತ್ತಿರಲಿಲ್ಲ. ಇದೆಲ್ಲ ವಿಡಿಯೊದಲ್ಲಿ ಸೆರೆಯಾಗಿದೆ.