ಮುಂಬೈ: ಭಾರತ-ನ್ಯೂಝಿಲೆಂಡ್ ಸೆಮಿಫೈನಲ್ ಪಂದ್ಯಕ್ಕೆ ಉಗ್ರರು ಸಂಚು ರೂಪಿಸಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಯಾಕೆಂದರೆ, ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಪಂದ್ಯದ ನಡುವೆ ಅಮಾನವೀಯ ಘಟನೆಯನ್ನು ನಡೆಸಲಾಗುವುದು ಎಂದು ಅಪರಿಚಿತ ವ್ಯಕ್ತಿಯೊಬ್ಬರು ಮುಂಬೈ ಪೊಲೀಸರಿಗೆ ಎಕ್ಸ್ ನಲ್ಲಿ ಬೆದರಿಕೆ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ವಾಂಖೆಡೆ ಸ್ಟೇಡಿಯಂ ಬಳಿ ಇರುವ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ್ದಾರಂತೆ. ವ್ಯಕ್ತಿ ತಾನು ಹಂಚಿಕೊಂಡಿರುವ ಫೋಟೋದಲ್ಲಿ ಗನ್, ಹ್ಯಾಂಡ್ ಗ್ರೆನೇಡ್ ಮತ್ತು ಬುಲೆಟ್ಗಳನ್ನು ತೋರಿಸಿ, ಮುಂಬೈ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.
ಸದ್ಯ ಪೊಲೀಸರು ಮುಂಬೈ ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ಬೆದರಿಕೆ ಸಂದೇಶ ಕಳುಹಿಸದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಂದ್ಯಕ್ಕೆ ಹಾಜರಾಗುವ ಪ್ರೇಕ್ಷಕರನ್ನು ಸಂಪೂರ್ಣವಾಗಿ ಪರಿಶೀಲಿಸಿ ನಂತರವೇ ಸ್ಟೇಡಿಯಂ ಒಳಗೆ ಬಿಡಲಿದ್ದಾರೆ. ವಾಂಖೆಡೆ ಸ್ಟೇಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.