ಡೆಹ್ರಾಡೂನ್: ಇಬ್ಬರು ದಿಗಂಬರ ಜೈನ ಮುನಿಗಳಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಪ್ರರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಕರಣದ ತನಿಖೆಗೆ ಪೊಲೀಸರು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ತೆಹ್ರಿ ಗರ್ಹವಾಲ್ ಜಿಲ್ಲೆಯ ನಿವಾಸಿ ಎಂದು ಹೇಳಲಾಗಿದೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ತಿಳಿಸಿದ್ದಾರೆ.
ರಸ್ತೆಬದಿ ಕುಳಿತ್ತಿರುವ ಜೈನ ಮುನಿಗಳ ಬಳಿ ತೆರಳುವ ಆರೋಪಿ, ಬಟ್ಟೆಯಿಲ್ಲದೆ ಸಾರ್ವಜನಿಕವಾಗಿ ಏಕೆ ಓಡಾಡುತ್ತಿದ್ದೀರಿ ಎಂದು ಪ್ರಶ್ನಿಸುವ ಮೂಲಕ ಅವರಿಗೆ ಕಿರುಕುಳ ನೀಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
ಆರೋಪಿಯು ಜೈನ ಮುನಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ. ಉತ್ತರಾಖಂಡ ಎಲ್ಲಾ ಧರ್ಮಗಳ ಅನುಯಾಯಿಗಳ ನಂಬಿಕೆಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮಕ್ಕೆ ಅಗೌರವ ತೋರವುದನ್ನು ಸಹಿಸುವುದಿಲ್ಲ ಎಂದು ಅಭಿನವ್ ಕುಮಾರ್ ಹೇಳಿದ್ದಾರೆ. ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕುಮಾರ್ ತಿಳಿಸಿದ್ದಾರೆ.

