ಶಿರಾ: ನಗರದಲ್ಲಿ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ತಾಲ್ಲೂಕು ಬಿಜೆಪಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ದ್ವಿಚಕ್ರ ವಾಹನಕ್ಕೆ ಹಗ್ಗ ಕಟ್ಟಿ ಎಳೆಯುತ್ತಾ, ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ವ್ಯಕ್ತಪಡಿಸಿದರು. ದ್ವಿಚಕ್ರ ವಾಹನಕ್ಕೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.
ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ನಿಭಾಯಿಸಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಏರಿಕೆ ಮಾಡಿದ್ದು ಇದರಿಂದ ಪೆಟ್ರೋಲ್ 3 ರೂ. ಹಾಗೂ ಡೀಸೆಲ್ 3.50ರೂ. ಹೆಚ್ಚಳವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾಗಲಿದ್ದು, ಸರ್ಕಾರವು ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದೆ ಕಳೆದೊಂದು ವರ್ಷದಿಂದಲೂ ಅಭಿವೃದ್ಧಿ ಶೂನ್ಯವಾಗಿದೆ.

ಸರ್ಕಾರದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಜನರ ಮೇಲೆ ಬರೆ ಹಾಕುತ್ತಿದೆ ಎಂದು ಕಿಡಿಕಾರಿದರು. ಹೆಚ್ಚಿಸಿರುವ ತೈಲ ದರವನ್ನು ಶೀಘ್ರವೇ ಪುನರ್ ಪರಿಶೀಲಿಸಬೇಕು. ದರ ಏರಿಕೆ ಕ್ರಮ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾಜಿ ತಾಲ್ಲೂಕು ಅದ್ಯಕ್ಷ ತರೂರು ಬಸವರಾಜು, ಬುಕ್ಕಾಪಟ್ಟಣ ಮಂಜುನಾಥ್, ಸೇರಿದಂತೆ ನಗರ ಮಂಡಲ, ಗ್ರಾಮಾಂತರ ಮಂಡಲ ಅಧ್ಯಕ್ಷರು, ಮಹಿಳಾ ಮೋರ್ಚಾ ಸೇರಿದಂತೆ ವಿವಿಧ ಪದಾಧಿಕಾರಿಗಳು ಮತ್ತಿತರ ಹಾಜರಿದ್ದರು.

