ಉಡುಪಿ: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 10 ದಿನಕ್ಕೆ ಕಾಲಿಟ್ಟಿದೆ. ಇಂದು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು, ಧರಣಿ ನಿರತರ ಬೇಡಿಕೆಗಳ ಮನವಿ ಸ್ವೀಕರಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗ ಹಾಗೂ ಕೃಷಿಭೂಮಿ ನೀಡಬೇಕೆಂಬ ಬೇಡಿಕೆಗಳ ಕುರಿತು ಆ.15ರ ಬಳಿಕ ಬೆಂಗಳೂರಿನಲ್ಲಿ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಉನ್ನತ ಮಟ್ಟದ ಸಭೆ ಕರೆದು ಚರ್ಚಿಸಿ, ಕ್ರಮ ತೆಗೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಬೇಡಿಕೆಗಳನ್ನು ಒಂದೇ ಬಾರಿಗೆ ಈಡೇರಿಸಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಕೊರಗ ಒಕ್ಕೂಟದ ಪದಾಧಿಕಾರಿಗಳನ್ನು ಕರೆಸಿ ಬೆಂಗಳೂರಿನಲ್ಲಿ ಸಭೆ ಕರೆದು ಯಾವ ಬೇಡಿಕೆ ಈಡೇರಿಸಬಹುದು ಮತ್ತು ಯಾವುದನ್ನು ಈಡೇರಿಸಲು ಆಗುವುದಿಲ್ಲ ಎಂಬುದರ ಬಗ್ಗೆ ಸ್ಪಷ್ಟತೆ ಪಡೆದು ಮುಂದಿನ ಹೆಜ್ಜೆ ಇಡಲಾಗುವುದು. ಮುಂದೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಸಮುದಾಯದವರಿಗೆ ಹೊರಗುತ್ತಿಗೆಯಲ್ಲಿ ಕೆಲಸ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಕೊರಗ ಸಮುದಾಯದಲ್ಲಿರುವ ಶಿಕ್ಷಿತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ಪಡೆದುಕೊಳ್ಳಬೇಕು. ಮುಂದೆ ಜಿಲ್ಲಾಮಟ್ಟದ ಪ್ರತಿಯೊಂದು ಇಲಾಖೆಯ ಹೊರಗುತ್ತಿಗೆ ನೇಮಕಾತಿ ಸಂದರ್ಭದಲ್ಲಿ ಕೊರಗ ಸಮುದಾಯದವರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಕರಾವಳಿ ಪ್ರದೇಶ ಮೂಲನಿವಾಸಿಗಳಾದ ಕೊರಗ ಸಮುದಾಯ ಅತ್ಯಂತ ಮುಗ್ಧರು. ಇವರ ನೋವುಗಳನ್ನು ಅರ್ಥ ಮಾಡಿಕೊಂಡು ಈ ಸಮುದಾಯದ ಜೊತೆ ನಿಲ್ಲಬೇಕಾಗಿರುವುದು ಎಲ್ಲ ಪಕ್ಷದವರು, ನಾಗರಿಕರು, ಅಧಿಕಾರಿಗಳ ಜವಾಬ್ದಾರಿಯಾಗಿದೆ. ನಿಮ್ಮ ನೋವನ್ನು ಅರ್ಥ ಮಾಡಿಕೊಂಡು ಪರಿಹಾರ ಕಂಡುಕೊಳ್ಳಲು ಇಲ್ಲಿಗೆ ಬಂದಿದ್ದೇನೆ. ಆದುದರಿಂದ ಕಳೆದ 10 ದಿನಗಳಿಂದ ನಡೆಸುತ್ತಿರುವ ಈ ಧರಣಿಯನ್ನು ಇಲ್ಲಿಗೆ ಕೈಬಿಡಬೇಕು. ಆ ಮೂಲಕ ನನಾವೆಲ್ಲ ಜೊತೆಜೊತೆಯಾಗಿ ಸಾಗಬೇಕು ಎಂದು ಖಾದರ್ ಮನವಿ ಮಾಡಿದರು.
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಮಾತನಾಡಿ, ಧರಣಿ ಅಂತ್ಯಗೊಳಿಸುವ ಬಗ್ಗೆ ಒಕ್ಕೂಟದ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕೊರಗ ಸಮುದಾಯದ ಮುಖಂಡರಾದ ಸಂಜೀವ, ಶೇಖರ್, ಬೊಗ್ರ ಕೊಕ್ಕರ್ಣೆ, ಪುತ್ರನ್ ಹೆಬ್ರಿ, ಪವಿತ್ರ ಮೊದಲಾದವರು ಉಪಸ್ಥಿತರಿದ್ದರು.

