ಉಡುಪಿ : ಜಿಲ್ಲಾಸ್ಪತ್ರೆ ಹಾಗೂ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭಾನುವಾರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ಯು.ಟಿ ಖಾದರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಜಿಲ್ಲಾಸ್ಪತ್ರೆಯ ವಾರ್ಡ್ ಗಳಿಗೆ ಭೇಟಿ ನೀಡಿದ ಅವರು ರೋಗಿಗಳೊಂದಿಗೆ ಮಾತನಾಡಿ ಆಸ್ಪತ್ರೆಯ ವ್ಯವಸ್ಥೆ ಚಿಕಿತ್ಸೆ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಸಭೆ ನಡೆಸಿ ಮಾಹಿತಿ ಪಡೆದರು.
ಬಳಿಕ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳೀಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉಡುಪಿ ಜಿಲ್ಲೆಯ ಸರಕಾರಿ ಆಸ್ಪತ್ರೆಗಳು ಉತ್ತಮವಾಗಿ ರೋಗಿಗಳಿಗೆ ಸೇವೆ ನೀಡಿತ್ತಿದ್ದು ಖಾಸಗಿ ಆಸ್ಪತ್ರೆಗಳಿಗೆ ಅವಲಂಬಿಸುವುದರ ಬದಲು ಇಲ್ಲಿನ ಸೇವೆಯನ್ನು ಜನರು ಪಡೆಯಬೇಕು. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈಗಾಗಲೇ ತಿಂಗಳಿಗೆ ಸುಮಾರು 100ಕ್ಕೂ ಅಧಿಕ ಹೆರಿಗೆಗಳು ನಡೆಯುತ್ತಿದ್ದು ಇದರ ಸಂಖ್ಯೆ ಇನ್ನುಷ್ಟು ಹೆಚ್ಚಬೇಕು.
ಜನರು ಖಾಸಗಿ ಆಸ್ಪತ್ರೆಗೆ ವಿನಾಕಾರಣ ಹಣ ವ್ಯಯ ಮಾಡುವ ಬದಲು ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆಯನ್ನು ಬಳಸಿಕೊಳ್ಳಬೇಕು. ಈ ಆಸ್ಪತ್ರೆಯಲ್ಲಿನ ಕೆಲವೊಂದು ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದು ಇದನ್ನು ಯಾವ ರೀತಿ ನಿರ್ವಹಿಸಬೇಕು ಎಂಬ ಕುರಿತು ಮುಂದಿನ ದಿನಗಳಲ್ಲಿ ಚಿಂತನೆ ನಡೆಸಲಾಗುವುದು. ಜಿಲ್ಲೆಯ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಭೆಯನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದರು.

