ಉಡುಪಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಶಾಲೆಯನ್ನು ದತ್ತು ತೆಗೆದುಕೊಂಡಿರುವ ರಿಷಬ್ ಶೆಟ್ಟಿ ಫೌಂಡೇಶನ್ ಸ್ಥಾಪಕರು ಹಾಗೂ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿಯವರು ಧ್ವಜಾರೋಹಣವನ್ನು ನೆರವೇರಿಸಿದರು.

ಬಳಿಕ ರಿಷಬ್ ಶೆಟ್ಟಿಯವರು ಸ್ವಾತಂತ್ರ ದಿನದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಪ್ರಸನ್ನ ಕುಮಾರ ಶೆಟ್ಟಿ, ಗ್ರಾಮ ಪಂಚಾಯತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ್ ಕೊಠಾರಿ, ಶಿಕ್ಷಣ ಇಲಾಖೆಯ ಸಿ.ಆರ್.ಪಿ ನಾಗರಾಜ್ ಶೆಟ್ಟಿ ಹಾಗೂ ಮುಖ್ಯ ಶಿಕ್ಷಕರಾದ ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಎಂಟನೇ ತರಗತಿ ವಿದ್ಯಾರ್ಥಿನಿ ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿಯಾದ ಕುಸುಮ ವಂದಿಸಿದರು. ಎಸ್,ಡಿ.ಎಂ.ಸಿ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.


