ಉಡುಪಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯುವ ತನಕ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಗುಡುಗಿದ್ದಾರೆ.

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಬಿಜೆಪಿ‌ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಬೆಲೆ ಏರಿಕೆ ಮಾಡಿ ಉಳಿದ ರಾಜ್ಯಗಳಿಗೆ ಸರಿಸಮಾನವಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ.

ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 94 ರೂಪಾಯಿ ಇದೆ. ಗುಜರಾತ್ ನಲ್ಲಿ 95 ಇದೆ, ಹರಿಯಾಣದಲ್ಲಿ 94 ರೂಪಾಯಿ ಇದೆ. ಈ ರಾಜ್ಯಗಳು ನಮಗೆ ಮೇಲ್ಪಂಕ್ತಿ ಯಾಗಬೇಕು. ತೆಲಂಗಾಣದಲ್ಲಿ ರೂ. 107 ಇದೆ, ಈ ಕಾರಣಕ್ಕೋಸ್ಕರ ಕರ್ನಾಟಕದಲ್ಲಿ ರೂ. 103 ಇದೆ.

ಕಾಂಗ್ರೆಸ್ ಆಳ್ವಿಕೆ ಇರುವ ಎಲ್ಲಾ ರಾಜ್ಯಗಳಲ್ಲಿ ಬೆಲೆ ಏರಿಕೆ ಆಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಚೊಂಬು ಪ್ರದರ್ಶಿಸಿದಿರಿ. ಇವತ್ತು ರಾಜ್ಯದಲ್ಲಿ ಜನರಿಗೆ ಚೊಂಬು ಕೊಟ್ಟಿದ್ದೀರಿ ಎಂದು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದರು.

72 ಜನರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಕೊಟ್ಟಿದ್ದಾರೆ. ಅವರ ಟಿಎ, ಡಿಎ, ಪೆಟ್ರೋಲ್ ಖರ್ಚು ಕೊಡಲು ಸರಕಾರ ಈ ದರ ಏರಿಕೆ ಮಾಡಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಯಾವ ಸರ್ಕಾರಗಳು ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಿಲ್ಲ. ರಾಜ್ಯ ಸರ್ಕಾರದ ಆದೇಶದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ. ಆದೇಶ ವಾಪಸ್ ಪಡೆಯುವ ತನಕ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ‌ ನೀಡಿದರು.