ಉಡುಪಿ: ಮಳೆಗಾಲ ಆರಂಭವಾಗಿ 14ದಿನಗಳು ಕಳೆದಿದ್ದರೂ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ತೋಡುಗಳ ಹೂಳೆತ್ತುವ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಕೊಡವೂರು ಸಾಯಿಬಾಬಾ ಮಂದಿರ ಸಮೀಪದ ತೋಡಿನಲ್ಲಿ ಹೂಳು ತೆರವುಗೊಳಿಸದಿರುವುದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯದೆ ಕೃತಕ ನೆರೆ ಉಂಟಾಗುವ ಆತಂಕ ಸ್ಥಳೀಯರಲ್ಲಿ ಮೂಡಿದೆ.

ತೋಡಿನ ಸುತ್ತಮುತ್ತ ಕೃಷಿ ಗದ್ದೆಗಳಿದ್ದು, ಭಾರೀ ಮಳೆಯ ಸಂದರ್ಭ ನೀರಿನ ಹರಿವಿಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಇದರಿಂದ ಕೃಷಿ ಭೂಮಿಗಳು ಜಲಾವೃತವಾಗುವ ಅಪಾಯ ಎದುರಾಗಿದ್ದು, ರೈತರು ಕಳವಳ ವ್ಯಕ್ತಪಡಿಸಿದ್ದಾರೆ. ಮಳೆ ನೀರಿನೊಂದಿಗೆ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳು ಗದ್ದೆಗಳಿಗೆ ಹರಿದು ಬರುವ ಸಾಧ್ಯತೆಯೂ ಇದ್ದು, ಕೃಷಿ ಚಟುವಟಿಕೆಗಳಿಗೆ ಹಾನಿಯಾಗುವ ಭೀತಿ ಇದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತೋಡಿನ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ನಗರಸಭೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ನೆರೆ ಸಮಸ್ಯೆ ತಡೆಗಟ್ಟಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮಳೆಗಾಲದಲ್ಲಿ ಎದುರಾಗಬಹುದಾದ ನೆರೆ ಹಾಗೂ ಪರಿಸರ ಮಾಲಿನ್ಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿರುವ ನಿವಾಸಿಗಳು, ಕೊಡವೂರು ಭಾಗದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.