ಲುಧಿಯಾನ: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಒಬ್ಬ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.
ಲೂಧಿಯಾನದ ಗಿಯಾಸ್ ಪುರ ಪ್ರದೇಶದ ಸಾಮ್ರಾಟ್ ಕಾಲೋನಿಯಲ್ಲಿ ಗುರುವಾರದಂದು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದರು. ಇಡೀ ಕಾಲೋನಿಯ ಇನ್ನುಳಿದ 34 ಮಂದಿ ತೀವ್ರವಾಗಿ ಗಾಯಗೊಂಡಿದ್ದರು.
ಮೃತಪಟ್ಟ ಮಹಿಳೆ ಸಿಲಿಂಡರ್ ಸ್ಫೋಟಗೊಂಡ ಮನೆಯ ಮಾಲಕನ ಪತ್ನಿ 40ರ ಹರೆಯದ ಸುನೀತಾ ಎಂದು ಪೊಲೀಸರು ಗುರುತಿಸಿದ್ದಾರೆ.
ಈ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ತಕ್ಷಣ ತನಿಖೆ ಕೈಗೊಳ್ಳಬೇಕೆಂದು ಆದೇಶಿಸಿದ್ದಾರೆ.