ಮುಂಬೈ: ವಿವಿಧ ಬ್ಯಾಂಕ್ಗಳಿಂದ ₹9,000 ಕೋಟಿ ಸಾಲ ಪಡೆದು, ಮರು ಪಾವತಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 27ರಂದು ವಿಚಾರಣೆಗೆ ಹಾಜರಾಗುವಂತೆ ಮುಂಬೈನ ಪಿಎಂಎಲ್ಎ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ್ ಮಲ್ಯ ಅವರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಆರ್ಥಿಕ ಅಪರಾಧಗಳ ತಡೆ ಸುಗ್ರೀವಾಜ್ಞೆ ಅಡಿ ಮಲ್ಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಪಿಎಂಎಲ್ಎ ನ್ಯಾಯಾಲಯಕ್ಕೆ ಎರಡನೇ ಆರೋಪ ಪಟ್ಟಿ ಸಲ್ಲಿಸಿತ್ತು. ಒಂದು ವೇಳೆ ಮಲ್ಯ ಆಗಸ್ಟ್ 27ರಂದು ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸುವ ಮತ್ತು ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ.
ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸುವಂತೆ ಜಾರಿ ನಿರ್ದೇಶನಾಲಯ ಕಳೆದ ವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ₹12,500 ಕೋಟಿ ಮೌಲ್ಯದ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ಕೋರಿತ್ತು.
ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿತ್ತು. ಆರ್ಥಿಕ ಅಪರಾಧಿಗಳನ್ನು ಮಟ್ಟ ಹಾಕಲು ಕೇಂದ್ರ ಜಾರಿಗೆ ತಂದ ಆರ್ಥಿಕ ಅಪರಾಧಗಳ ತಡೆ ಸುಗ್ರೀವಾಜ್ಞೆ ಅಡಿ ಇದೇ ಮೊದಲ ಬಾರಿಗೆ ಕ್ರಮ ಜರುಗಿಸಲಾಗುತ್ತಿದೆ.