ನವದೆಹಲಿ: ಸಾಮಾನ್ಯ ವರ್ಗದವರಿಗೂ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಮಸೂದೆಗೆ ವಿಪಕ್ಷಗಳು ಬೆಂಬಲ ಸೂಚಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಅವರು, ದೇಶದ ಇತಿಹಾಸದಲ್ಲಿ ಇದೊಂದು ಮೈಲುಗಲ್ಲು. ಈ ಮಸೂದೆಯಿಂದ ಸಮಾಜದ ಎಲ್ಲಾ ವರ್ಗದ ಬಡಜನರಿಗೆ ನ್ಯಾಯ ಒದಗಿಸಿದಂತೆ ಆಗುವುದು ಎಂದು ಹೇಳಿದ್ದಾರೆ.
ಮೀಸಲಾತಿ ಮಸೂದೆಗೆ ಅಂಗೀಕಾರ ದೊರಕಿರುವುದು ಲೋಕಸಭೆ ಇತಿಹಾಸದಲ್ಲಿ ಒಂದು ಮೈಲಿಗಲ್ಲು. ಎಲ್ಲಾ ಪಕ್ಷಗಳ ಸಂಸದರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚರ್ಚೆಯಲ್ಲಿ ಭಾಗಿಯಾದ ಸಂಸದರನ್ನು ನಾನು ಶ್ಲಾಘಿಸುತ್ತೇನೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಘೋಷಣೆಗೆ ನಾವು ಬದ್ಧರಾಗಿದ್ದೇವೆ. ಸಮಾಜದ ಪ್ರತೀ ವರ್ಗದ ಬಡವನು ಗೌರವದಿಂದ ಬದುಕಬೇಕು ಮತ್ತು ಎಲ್ಲಾ ರೀತಿಯ ಅವಕಾಶಗಳು ಅವರಿಗೆ ಸಿಗಬೇಕು ಎಂದು ಪ್ರಧಾನಿ ತಿಳಿಸಿದ್ದಾರೆ.