ದೆಹಲಿ:ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಇಲ್ಲ. ಎಲ್ಲರೂ ಸೇರಿ ಜನರ ಹಿತಕ್ಕಾಗಿ ಕೆಲಸ ಮಾಡೋಣ. ಕೇಂದ್ರದ ಮುಂದೆ ಬಾಕಿ ಇರುವ ಯೋಜನೆಗಳನ್ನು ತ್ವರಿತವಾಗಿ ಮಂಜೂರು ಮಾಡಿಸಲು ಎಲ್ಲರ ಸಹಕಾರ ಅಗತ್ಯ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಸಚಿವರ ಜತೆ ಸಭೆ ನಡೆಸಿ ಮಾತನಾಡುತ್ತಾ,ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳು, ಕೇಂದ್ರಕ್ಕೆ ಸಲ್ಲಿಸಿರುವ ಮನವಿ ಕುರಿತು ಮತ್ತು ಕೇಂದ್ರದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು ಸಭೆಗೆ ಮಾಹಿತಿ ನೀಡಿದರು. ಬಾಕಿ ಇರುವ ರೈಲ್ವೆ ಯೋಜನೆಗಳು, ಕಲಬುರ್ಗಿ ರೈಲ್ವೆ ವಿಭಾಗ ಸ್ಥಾಪನೆ, ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ, ಬೆಂಗಳೂರು ಫೆರಿಫೆರಲ್ ರಿಂಗ್ ರಸ್ತೆ, ಸ್ಮಾರ್ಟ್ ಸಿಟಿ ಮಿಷನ್ ಗೆ ಬೆಂಗಳೂರು ನಗರ ಸೇರ್ಪಡೆ, ಐದು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಅನುದಾನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಂಸದರಿಗೆ ಸಿಎಂ ಮನವಿ ಮಾಡಿಕೊಂಡರು.
ಏರೋಸ್ಪೇಸ್ ಯೂನಿವರ್ಸಿಟಿ ಸ್ಥಾಪನೆ, ಹೈಕೋರ್ಟ್ ನಡವಳಿಕೆಗಳಲ್ಲಿ ಕನ್ನಡ ಬಳಕೆ, ಕರ್ನಾಟಕ ಮುನ್ಸಿಪಲ್ ಕಾಯ್ದೆಗೆ ತಿದ್ದುಪಡಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಂಸದರ ಗಮನ ಸೆಳೆದರು. ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಮತ್ತು ವಿದ್ಯುತ್ ಯೋಜನೆಗಳಿಗೆ ಕಲ್ಲಿದ್ದಲು ಒದಗಿಸುವ ಬಗ್ಗೆಯೂ ಚರ್ಚೆ ನಡೆಯಿತು.
ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ, ರಾಜ್ಯದ ಸಚಿವರಾದ ಎಚ್.ಕೆ. ಪಾಟೀಲ್, ಡಿ.ಕೆ. ಶಿವಕುಮಾರ್, ಮಹದೇವಪ್ಪ, ಮಹದೇವಪ್ರಸಾದ್, ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್. ದೆಹಲಿ ಪ್ರತಿನಿಧಿ ಅಪ್ಪಾಜಿ ನಾಡಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಉಪಸ್ಥಿತರಿದ್ದರು.