ನವದೆಹಲಿ: ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಇಲ್ಲವಾದರೆ, ‘ಪ್ರಧಾನಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸುತ್ತಾರೆ. ಅಷ್ಟೇ ಅಲ್ಲದೆ, ಕೇಂದ್ರ ಸರ್ಕಾರವು ರೈತರ ಹೆಸರು ಕೆಡಿಸುವ ಪ್ರಯತ್ನ ಮಾಡುತ್ತಿದ್ದು, ಅದು ಸಫಲವಾದಂತೆ ಆಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅಧ್ಯಕ್ಷ ಬಲ್ಬೀರ್ ಸಿಂಗ್ ರಾಜೇವಾಲ್ ಪ್ರತಿಭಟನಾ ನಿರತ ರೈತರನ್ನು ಎಚ್ಚರಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿಯ ಸ್ಥಿತಿಗತಿಗಳ ಕುರಿತು ಮಾತನಾಡಿದ ಅವರು, ‘ನಮ್ಮ ಹೋರಾಟದ ವೇಳೆ ಸರ್ಕಾರವು ಇಂಟರ್ನೆಟ್ ಸ್ಥಗಿತಗೊಳಿಸಿತು. ಸರ್ಕಾರ ನಮ್ಮ ಹೆಸರು ಕೆಡಿಸುವ ಪ್ರಯತ್ನವನ್ನೂ ಮಾಡಿತು. ಶಾಂತಿಯುತ ಪ್ರತಿಭಟನೆ ನಡೆಸುವಂತೆ ನಾನು ರೈತರಲ್ಲಿ ಮನವಿ ಮಾಡುತ್ತೇನೆ. ಇಲ್ಲವಾದಲ್ಲಿ ಅದುವೇ ನಮ್ಮ ಸೋಲಿನ ಮೂಲವಾಗುತ್ತದೆ’ ಎಂದು ಹೇಳಿದ್ದಾರೆ.
ಅದರೊಂದಿಗೆ ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ತಿಳಿಸಿ, ಯಾರಾದರೂ ನಿಮ್ಮನ್ನು ಕೆರಳಿಸಲು ಪ್ರಯತ್ನಿಸಿದ್ದಾರೆ ಏನೂ ಪ್ರತಿಕ್ರಿಯಿಸದೆ ಸುಮ್ಮನಿದ್ದು ಬಿಡಿ. ನಾವು ಯುದ್ಧ ಮಾಡುತ್ತಿಲ್ಲ ಎಂಬುದನ್ನು ಗಮನದಲ್ಲಿ ಇಟ್ಟುಕೊಳ್ಳಿ. ಹಾಗೂ ಇದು ನಮ್ಮ ದೇಶ ಮತ್ತು ನಮ್ಮದೇ ಸರ್ಕಾರ ಎಂದು ತಿಳಿಸಿದರು.