ಚೆನ್ನೈ: ಎಐಎಡಿಎಂಕೆಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದೆ. ಸೋಮವಾರ ನಡೆದ ಸಂಸದರು, ಶಾಸಕರು ಮತ್ತು ಜಿಲ್ಲಾ ಮುಖಂಡರ ಸಭೆಯಲ್ಲಿ ಈ ಕುರಿತು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದ್ದು ಸಭೆ ಬಳಿಕ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕೆಪಿ ಮುನುಸಾಮಿ ಈ ಕುರಿತು ಅಧಿಕೃತ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಭಾರತೀಯ ಜನತಾ ಪಕ್ಷದೊಂದಿಗಿನ ಸಂಬಂಧವನ್ನು ಎಐಎಡಿಎಂಕೆ ಕಡಿದುಕೊಂಡಿದೆ. ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿದ ನಂತರ ಪಕ್ಷದ ಕಾರ್ಯಕರ್ತರು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕಳೆದ ಸೋಮವಾರ ಎಐಎಡಿಎಂಕೆ ನಾಯಕ ಜಯಕುಮಾರ್ ಈ ಸಂಬಂಧ ಹೇಳಿಕೆ ನೀಡಿದ್ದರು. ‘ಬಿಜೆಪಿಯೊಂದಿಗೆ ಈಗ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ನಮ್ಮ ನಾಯಕರನ್ನು ಟೀಕಿಸುವುದನ್ನು ಮುಂದುವರಿಸಿದರೆ, ನಾವು ತೀವ್ರವಾಗಿ ಪ್ರತಿಕ್ರಿಯಿಸುತ್ತೇವೆ ಎಂದು ಜಯ್ ಕುಮಾರ್ ಹೇಳಿದ್ದರು.
2026ರಲ್ಲಿ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂಬ ಅಣ್ಣಾಮಲೈ ಅವರ ಪ್ರತಿಪಾದನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಯಕುಮಾರ್, ಈಗಾಗಲೇ ಅಣ್ಣಾಮಲೈ ಅವರು ಅಮ್ಮ (ಜೆ ಜಯಲಲಿತಾ) ಅವರನ್ನು ಟೀಕಿಸಿದ್ದಾರೆ ಮತ್ತು ಎಐಎಡಿಎಂಕೆ ಪಕ್ಷದ ಸಭೆಯಲ್ಲಿ ಅವರ ವಿರುದ್ಧ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಹೇಳಿದರು. ಅಣ್ಣಾಮಲೈ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅನರ್ಹರು. ಅವರು ಬಿಜೆಪಿಗಿಂತ ಹೆಚ್ಚಾಗಿ ತಮ್ಮನ್ನು ತಾವು ಬಿಂಬಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಅಣ್ಣಾಮಲೈ ಯಾವ ಕಾರಣಕ್ಕೆ ಪೊಲೀಸ್ ಕೆಲಸ ಬಿಟ್ಟಾರೋ ಗೊತ್ತಿಲ್ಲ. ಆ ಬಗ್ಗೆ ಕೆದಕಿದರೆ ಮಾತ್ರ ಗೊತ್ತಾಗುತ್ತದೆ. ಅಣ್ಣಾಮಲೈ ನೀಚ ಮನಸ್ಸಿನ ವ್ಯಕ್ತಿ. ಅಣ್ಣಾಮಲೈ ಏಕಾಂಗಿಯಾಗಿ ಸ್ಪರ್ಧಿಸಿದರೆ ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆಯುತ್ತಾರೆ ಎಂದು ಜಯಕುಮಾರ್ ಹೇಳಿದ್ದರು.