ಲಕ್ನೋ : ಉತ್ತರ ಪ್ರದೇಶದ ಲಲಿತಪುರ ಜಿಲ್ಲೆಯ 11ನೇ ಕ್ಲಾಸ್ ಓದುತ್ತಿರುವ 17 ವರ್ಷದ ಅಪ್ರಾಪ್ತೆ ಮೇಲೆ ಆಕೆಯ ತಂದೆ ಮತ್ತು ಎಸ್ಪಿ- ಬಿಎಸ್ಪಿ ನಾಯಕರು ಅತ್ಯಾಚಾರ ನಡೆಸಿರುವ ಆರೋಪಗಳು ಕೇಳಿ ಬಂದಿವೆ. ಮೂವರು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಪೊಲೀಸರು ಸಂತ್ರಸ್ತೆ ಹೇಳಿಕೆಯನ್ನಾಧರಿಸಿ ಅತ್ಯಾಚಾರ, ಸಂಚು ರಚನೆ ಸೇರಿದಂತೆ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ವರದಿಯಾಗುತ್ತಿದ್ದಂತೆ ಲಲಿತಪುರ ಜಿಲ್ಲೆಯಲ್ಲಿ ಒಂದು ರೀತಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇತ್ತ ಪ್ರಕರಣ ದಾಖಲಾಗುತ್ತಿದಂತೆ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳೆಲ್ಲ ಆಧಾರರಹಿತ ಎಂದು ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ತಿಲಕ್ ಯಾದವ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ತಿಲಕ್ ಯಾದವ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಯದಿದ್ರೆ ನಡು ರಸ್ತೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಇದಕ್ಕೆ ಜಿಲ್ಲಾಡಳಿತವೇ ಕಾರಣವಾಗಲಿದೆ ಎಂದು ಆಕ್ರೋಶದ ಮಾತುಗಳನ್ನಾಡಿದ್ದಾರೆ.