ನವದೆಹಲಿ: ಪಕ್ಷದ ನಾಯಕತ್ವದ ಬಗ್ಗೆ ಬಗೆಹರಿಯದ ಗೊಂದಲದಲ್ಲೇ ಮುಂದುವರಿದಿರುವ ಕಾಂಗ್ರೆಸ್ನ ಕಾರ್ಯಕಾರಿಣಿ ಇದೇ ತಿಂಗಳ 16ರ ಬೆಳಗ್ಗೆ 10 ಗಂಟೆಗೆ, ದೆಹಲಿಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಂದಿನ ವರ್ಷ ನಡೆಯಲಿರುವ ವಿವಿಧ ರಾಜ್ಯಗಳ ಚುನಾವಣೆ ಬಗ್ಗೆ ಹಾಗೂ ಪಕ್ಷಕ್ಕೆ ಸೂಕ್ತ ನಾಯಕರನ್ನು ಆರಿಸುವ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ.
ಪಂಜಾಬ್ನಲ್ಲಿ ಇತ್ತೀಚೆಗೆ ಏರ್ಪಟ್ಟಿದ್ದ ಪಕ್ಷದ ಬಿಕ್ಕಟ್ಟಿನ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಾಕಾರಿಣಿ ಇದು. ಜೊತೆಗೆ, ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್, ಕಾಂಗ್ರೆಸ್ನಲ್ಲಿ ಚುನಾಯಿತ ಅಧ್ಯಕ್ಷರೇ ಇಲ್ಲ. ಹಾಗಾಗಿ, ಪಕ್ಷದಲ್ಲಿ ಯಾರು ನಿರ್ಧಾರ ಕೈಗೊಳ್ಳುತ್ತಿದ್ದಾರೆಂಬುದೇ ಗೊತ್ತಿಲ್ಲ ಎಂದಿದ್ದರು. ಈ ಎಲ್ಲಾ ಬೆಳವಣಿಗೆಗಳ ನಂತರ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ.