ನವದೆಹಲಿ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.
‘ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಕೇರಳದ ನಮ್ಮ ಸಹೋದರರು ಮತ್ತು ಸಹೋದರಿಯರಿಗೆ ಮನವಿ ಮಾಡುತ್ತೇನೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ದೇಶದ ಬೇರೆ ರಾಜ್ಯಗಳಲ್ಲಿ ಕೊರೊನಾ ಆರ್ಭಟ ಇಳಿಯುತ್ತಿದ್ದರೆ ಕೇರಳದಲ್ಲಿ ಮಾತ್ರ ಏರಿಕೆಯಾಗುತ್ತಿದೆ. ದೇಶದ ಸಕ್ರಿಯ ಪ್ರಕರಣಗಳ ಪೈಕಿ ಶೇ. 37.1 ರಷ್ಟು ಕೇರಳದಲ್ಲಿವೆ.
ರಾಜ್ಯದಲ್ಲಿ ದಿನನಿತ್ಯದ ಸರಾಸರಿ ಪ್ರಕರಣಗಳು 17,443 ಕ್ಕಿಂತ ಹೆಚ್ಚಿವೆ. ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯ ಶೇಕಡಾ 12.93 ರಷ್ಟು ಮತ್ತು ವಾರಕ್ಕೆ 11.97 ರಷ್ಟು ಪ್ರಕರಣಗಳು ಕೇರಳದಿಂದಲೇ ವರದಿಯಾಗುತ್ತಿವೆ.
ಬಕ್ರೀದ್ ಹಬ್ಬಕ್ಕೆ ಮೂರು ದಿನಗಳ ಕಾಲ ಕೋವಿಡ್ ನಿರ್ಬಂಧಗಳಿಗೆ ವಿನಾಯಿತಿ ಘೋಷಿಸಿದ್ದ ಕೇರಳದ ಕ್ರಮಕ್ಕೆ ಸುಪ್ರೀಂ ಕೋರ್ಟ್ನಿಂದಲೂ ಆಕ್ಷೇಪ ವ್ಯಕ್ತವಾಗಿತ್ತು. ಕೋವಿಡ್ ಸಂಖ್ಯೆ ಏರುತ್ತಿರುವಾಗ ನಿರ್ಬಂಧ ಸಡಿಲಿಕೆ ಸರಿಯಲ್ಲ. ಇದರಿಂದಾಗಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಾದರೆ ಕಠಿಣ ಕ್ರಮ ಜರುಗಿಸುವುದಾಗಿ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಎಸ್. ಕೆ. ಸಿಂಗ್ ನೇತೃತ್ವದ 6 ಸದಸ್ಯರ ತಂಡವು ಇಂದು ಕೇರಳ ತಲುಪಲಿದ್ದು, ಕೋವಿಡ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಲಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೇರಳ ಸರ್ಕಾರಕ್ಕೆ ಕೇಂದ್ರ ತಂಡ ನೆರವು ನೀಡಲಿದೆ.