ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನಡೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ನಿಮಗೆ ಪ್ರತಿಭಟನೆ ಮಾಡಲು ಹಕ್ಕಿದೆ, ಹಾಗೆಂದ ಮಾತ್ರಕ್ಕೆ ರಸ್ತೆ ತಡೆ ಮಾಡಲು ನಿಮಗೆ ಅಧಿಕಾರವಿಲ್ಲ ಎಂದು ಚಾಟಿ ಬೀಸಿದೆ.
ಕೃಷಿ ಸಂಘಟನೆಗಳಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಗಡುವನ್ನು ನೀಡಿದೆ. ದೆಹಲಿಯ ವಿವಿಧ ಭಾಗಗಳಲ್ಲಿ ರೈತ ಸಂಘಟನೆಗಳು ಸುಮಾರು 1 ವರ್ಷಗಳಿಂದ ಪ್ರತಿಭಟನೆಯನ್ನು ಮುಂದುವರಿಸಿವೆ. ಪ್ರತಿಭಟನಾಕಾರರು ರಸ್ತೆ ತಡೆ ಮಾಡುವುದನ್ನು ನಿಲ್ಲಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಿದೆ.
ಇದಕ್ಕೊಂದು ಪರಿಹಾರವನ್ನು ನಾವು ಕಂಡುಹಿಡಿಯಲೇಬೇಕಿದೆ. ನಾವು ರೈತರ ಪ್ರತಿಭಟಿಸುವ ಹಕ್ಕನ್ನು ವಿರೋಧಿಸುತ್ತಿಲ್ಲ. ಆದರೆ ಅವರು ರಸ್ತೆಗಳನ್ನು ನಿರ್ಬಂಧಿಸುವುದು ಕಾನೂನು ಪ್ರಕಾರವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನೋಯ್ಡಾದ ನಿವಾಸಿಯೊಬ್ಬರು ಸಲ್ಲಿಸಿದ ಅರ್ಜಿ ಇದಾಗಿದ್ದು, ರಾಷ್ಟ್ರ ರಾಜಧಾನಿಯ ಹೆದ್ದಾರಿಗಳಲ್ಲಿ ಪ್ರತಿಭಟನಾಕಾರರನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರು.