ಬೆಂಗಳೂರು: ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಯಡಿಯೂರಪ್ಪ ಪಾಳಯದ ನಾಯಕನನ್ನೇ ಮುಖ್ಯಮಂತ್ರಿಯಾಗಿ ನೇಮಕ ಮಾಡಿ, ಬಿಎಸ್ವೈ ಅವರಿಗೂ ಬೇಸರವಾಗದಂತೆ ನೋಡಿಕೊಳ್ಳುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದೆ. ಒಂದರ್ಥದಲ್ಲಿ ಯಡಿಯೂರಪ್ಪ ಅವರನ್ನು ಕೆಳಕ್ಕಿಳಿಸಿರುವುದರಿಂದ ಮುಂದಿನ ದಿನಗಳಲ್ಲಿ ಬಿಎಸ್ವೈ ಆಪ್ತ ಬಣ ಬಿಜೆಪಿ ಸರ್ಕಾರವನ್ನು ಬೀಳಿಸಲು ಯತ್ನಿಸಬಹುದು ಎನ್ನಲಾಗಿತ್ತು. ಆದರೀಗ, ಯಡಿಯೂರಪ್ಪ ಅವರ ಆಶಯದಂತೆ, ಬೊಮ್ಮಾಯಿ ಅವರನ್ನು ಆಯ್ಕೆಮಾಡಿ ಆಂತರಿಕ ಗೊಂದಲವಾಗದಂತೆ ಹೈಕಮಾಂಡ್ ನೋಡಿಕೊಂಡಿದೆ.
ಜತೆಗೆ ಪಂಚಮಸಾಲಿ ಲಿಂಗಾಯತ ಸಮುದಾಯದ ಅಘೋಷಿತ ನಾಯಕ ಯಡಿಯೂರಪ್ಪ ಅವರನ್ನು ಇಳಿ ವಯಸ್ಸಿನಲ್ಲಿ ಬಿಜೆಪಿ ಹೈಕಮಾಂಡ್ ಒತ್ತಾಯ ಪೂರ್ವಕವಾಗಿ, ಬೇಸರ ತರಿಸಿ ಕೆಳಗಿಳಿಸಿದೆ ಎಂಬ ಆರೋಪ ಎಲ್ಲರಿಂದಲೂ ಕೇಳಿ ಬಂದಿತ್ತು. ಸಮುದಾಯದ ಹಲವು ಸ್ವಾಮೀಜಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಲ್ಲದೇ ಬಿಜೆಪಿ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದರು. ಇದೆಲ್ಲವನ್ನೂ ಹೈಕಮಾಂಡ್ ಪರಿಗಣನೆಗೆ ತೆಗೆದುಕೊಂಡಿದೆ ಎಂಬುದು ಇದೀಗ ಸ್ಪಷ್ಟವಾಗಿದೆ. ಒಂದೆಡೆ ಬಿಎಸ್ ಯಡಿಯೂರಪ್ಪ ಮತ್ತು ಅವರ ಪರ ಬಣಕ್ಕೆ ಬೇಸರವಾಗದಂತೆ ನೋಡಿಕೊಂಡು, ಇನ್ನೊಂದೆಡೆ 78 ವರ್ಷ ದಾಟಿರುವ ಯಡಿಯೂರಪ್ಪ ಅವರಿಗೆ ಪಂಚಮಸಾಲಿ ಲಿಂಗಾಯತ ಸಮುದಾಯದಿಂದ ಉತ್ತರಾಧಿಕಾರಿಯಾಗಿಯೂ ಬೊಮ್ಮಾಯಿ ಅವರನ್ನು ಬಿಜೆಪಿ ಬಿಂಬಿಸಿದೆ.
ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ನಾಳೆ ಮಧ್ಯಾಹ್ನ 3.30ಕ್ಕೆ ಬಸವರಾಜ್ ಬೊಮ್ಮಾಯಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಸವರಾಜ್ ಬೊಮ್ಮಾಯಿ ಕಳೆದೆರಡು ವರ್ಷದಿಂದ ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಉಪ ಮುಖ್ಯಮಂತ್ರಿ ಮತ್ತು ಗೃಹಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜತೆಗೆ ಈ ಹಿಂದೆ ಜಲಸಂಪನ್ಮೂಲ ಖಾತೆಯನ್ನು, ಹಾವೇರಿ, ಉಡುಪಿ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿರುವ ಅನುಭವವಿದೆ.
ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಶ್ರೀರಾಮುಲು, ಗೋವಿಂದ ಕಾರಜೋಳ ಮತ್ತು ಆರ್.ಅಶೋಕ್ ಅವರು ಆಯ್ಕೆಯಾಗಿದ್ದಾರೆ.
ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮೂವರನ್ನು ಆಯ್ಕೆ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಅವರು ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.