ಮುಂಬೈ : ಮಹಾರಾಷ್ಟ್ರದ ಸಿಂಧ್ ದುರ್ಗ ಜಿಲ್ಲೆಯ ಮಾಳವನ್ ನಲ್ಲಿರುವ ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ದುಷ್ಕರ್ಮಿಗಳು ಸೋಡಾ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮುಂಬೈಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ಮಾಳವನ್ ನ ಕರಾವಳಿ ಪ್ರದೇಶ ರೌತವಾಡಿಯಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಕುರಿತಾಗಿ ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ರಾವತ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ನಾಲ್ವರು ಅಪರಿಚಿತರು ರವಾತ್ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿ ಎಸೆದು ನಂತರ ಅಲ್ಲಿಂದ ಪರಾರಿಯಾಗಿದ್ದಾರೆ. ಬಂಗಲೆ ನಿರ್ವಹಣೆ ಮಾಡುತ್ತಿದ್ದವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 336, 34, 37 (1) ಮತ್ತು 135ರ ಅಡಿಯಲ್ಲಿ ಅಪರಿಚಿತರ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅವರು ಹೇಳಿದರು.