ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ. ನೌಕೆ ಆಗಸ್ಟ್ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ.
ಇಸ್ರೋ ವಿಜ್ಞಾನಿಗಳ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಸಚಿನ್ ತೆಂಡೂಲ್ಕರ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಏರಲಿದ್ದು, ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಉತ್ಸಾಹ ಮತ್ತು ಜಾಣ್ಮೆಗೆ ನಾನು ನಮಸ್ಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ವಿಜ್ಞಾನಿಗಳಿಗೆ ಅಭಿನಂದಿಸಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದಿದ್ದಾರೆ.