ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷ ಆಂಧ್ರ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ನೇಮಕ ಮಾಡಿದೆ. ಜನವರಿ 4ರಂದು ಶರ್ಮಿಳಾ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು.
ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜಿ. ರುದ್ರರಾಜು ರಾಜೀನಾಮೆಯ ಬಳಿಕ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ವೈ. ಎಸ್. ಶರ್ಮಿಳಾರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸೋನಿಯಾ ಗಾಂಧಿ ಭೇಟಿಯಾದ ಜಗನ್ ಸಹೋದರಿ ಶರ್ಮಿಳಾ ಜನವರಿ 4ರಂದು ವೈ. ಎಸ್. ಶರ್ಮಿಳಾ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು.
ಕೆಲವೇ ತಿಂಗಳುಗಳಲ್ಲಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಈ ನೇಮಕ ಮಹತ್ವ ಪಡೆದುಕೊಂಡಿದೆ. ಶರ್ಮಿಳಾ ರಾಜಕೀಯವಾಗಿ ಸಹೋದರನ ಜೊತೆ ಗುರುತಿಸಿಕೊಂಡಿಲ್ಲ. ಸಹೋದರ ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶದ ಹಾಲಿ ಮುಖ್ಯಮಂತ್ರಿ. ತೆಲಂಗಾಣ ಚುನಾವಣೆಗಾಗಿ ವೈಎಸ್ಆರ್ ತೆಲಂಗಾಣ ಪಕ್ಷ ಸ್ಥಾಪನೆ ಮಾಡಿದ್ದ ವೈ. ಎಸ್. ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿದ್ದರು.
ಬಳಿಕ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು. ಜ.4ರಂದು ಕಾಂಗ್ರೆಸ್ ಸೇರಿದ್ದರು. ಈ ವರ್ಷದ ಮೇ ತಿಂಗಳಿನಲ್ಲಿ ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕರ್ನಾಟಕ, ತೆಲಂಗಾಣದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆದಿರುವ ಕಾಂಗ್ರೆಸ್ ಪಕ್ಷ ಆಂಧ್ರ ಪ್ರದೇಶದಲ್ಲಿಯೂ ಜಗನ್ ಮೋಹನ್ ರೆಡ್ಡಿ ಸೋಲಿಸಿ ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ.