ಅಸ್ಸಾಂ : ಭೀಕರ ಪ್ರವಾಹ ಉಂಟಾಗಿದೆ. ಇತ್ತೀಚಿಗೆ ಸುರಿದ ಮಳೆಯಿಂದಾಗಿ ಅಸ್ಸಾಂನ ಆರು ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿವೆ. ಪ್ರವಾಹದಿಂದಾಗಿ ಸುಮಾರು 25,000 ಜನರು ನಿರಾಶ್ರಿತರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 94 ಗ್ರಾಮಗಳು ಮುಳುಗಡೆಯಾಗಿವೆ. ಪ್ರವಾಹದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅರೆಸೇನಾ ಪಡೆ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಶ್ರಮಿಸುತ್ತಿವೆ. ದಿಮಾ ಹಸಾವೊ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ ಮೂವರಲ್ಲಿ ಒಬ್ಬ ಮಹಿಳೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭೀಕರ ಪ್ರವಾಹಕ್ಕೆ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ಹಲವಾರು ಮನೆಗಳು ಮತ್ತು ಸೇತುವೆಗಳಿಗೆ ಹಾನಿಯಾಗಿದೆ. ಮಳೆಯ ಪರಿಣಾಮ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಅಸ್ಸಾಂ ಅಲ್ಲದೆ ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲೂ ಎರಡು-ಮೂರು ದಿನಗಳಿಂದ ಭಾರೀ ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ ಸುಮಾರು 1,732 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಅಸ್ಸಾಂನಲ್ಲಿ ಅಧಿಕಾರಿಗಳು ಅಂದಾಜಿಸಿದ್ದಾರೆ. ರಾಜ್ಯದ ಪ್ರಮುಖ ನದಿ ಬ್ರಹ್ಮಪುತ್ರ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಹವೂ ತೀವ್ರಗೊಳ್ಳುತ್ತಿದೆ.