ಬಿಹಾರ : ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರಬಂದ ನಂತರ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಆರ್ಜೆಡಿ ಮತ್ತು ಇತರ ಪಕ್ಷಗಳೊಂದಿಗೆ ಸೇರಿ ಮಹಾಘಟಬಂಧನ್ ಸರ್ಕಾರವನ್ನು ರಚಿಸಲಾಯಿತು.
ಈ ಕ್ರಮದಲ್ಲಿ ನಿತೀಶ್ ಕುಮಾರ್ ಬಿಹಾರ ಸಿಎಂ ಆಗಿ ಹಾಗೂ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಆಗಸ್ಟ್ 10ರಂದು ಪ್ರಮಾಣ ವಚನ ಸ್ವೀಕರಿಸಿದರು. ಅದಾದ ಬಳಿಕ ಇಂದು ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಬೆಳಗ್ಗೆ 11.30ಕ್ಕೆ 31 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು.
ಮೈತ್ರಿಕೂಟದಲ್ಲಿ ದೊಡ್ಡ ಪಕ್ಷವಾಗಿರುವ ಆರ್ಜೆಡಿಗೆ ಸಿಂಹಪಾಲು ದಕ್ಕಿದೆ. ಆರ್ಜೆಡಿಯಿಂದ 16 ಮಂದಿಗೆ ಸಚಿವ ಸ್ಥಾನ, ಜೆಡಿಯುನಿಂದ 11 ಮಂದಿಗೆ ಸಚಿವ ಸ್ಥಾನ, ಇಬ್ಬರು ಕಾಂಗ್ರೆಸ್ ಶಾಸಕರು, ಹಿಂದೂಸ್ತಾನಿ ಅವಾಮ್ ಮೋರ್ಚಾದ ಒಬ್ಬರು ಮತ್ತು ಏಕೈಕ ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.