ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಗುರುವಾರ ರಾತ್ರಿ ಅನುಮೋದನೆ ದೊರೆಯಿತು.
ಇನ್ನು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ, ಮಹಿಳೆಯರ ವಿಷಯದಲ್ಲಿ ಬಿಜೆಪಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ. ಪಂಚಾಯತಿಗಳಲ್ಲಿ ಶೇ 33ರಷ್ಟು ಮೀಸಲಾತಿಯು ತಳಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ಕಂಡಿದೆ ಎಂದರು.
ಪಂಚಾಯತ್ಗಳನ್ನು ಗಮನಿಸಿದರೆ ಈ ಮಸೂದೆಯ ಕರಡನ್ನು ಬಹಳ ಚಿಂತನಶೀಲವಾಗಿ ಸಿದ್ಧಪಡಿಸಲಾಗಿದೆ ಎಂದು ಹೇಳಬಹುದು. ಈ ಮಸೂದೆಯನ್ನು ಬಹಳ ದಿನಗಳಿಂದ ನಿರೀಕ್ಷಿಸಲಾಗಿದೆ. ಜನಗಣತಿಯ ನಂತರ ಸೀಮೆ ವಿಂಗಡಣೆ ಪ್ರಕ್ರಿಯೆ ಮುಗಿದ ನಂತರವಷ್ಟೇ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆ ಸ್ಥಾನಗಳನ್ನು ಮೀಸಲಿಡಲು ಸಾಧ್ಯ ಎಂದರು. ಈ ಕಾನೂನು ಹದಿನೈದು ವರ್ಷಗಳವರೆಗೆ ಜಾರಿಯಲ್ಲಿರುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಅಂಗೀಕೃತಗೊಂಡ ಬಗ್ಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕಾರಗೊಂಡಿರುವುದು ಭಾರತೀಯ ರಾಜಕೀಯದಲ್ಲಿ ಒಂದು ಮೈಲಿಗಲ್ಲಾಗಿದೆ ಎಂದು ಹೇಳಿದರು. ನಾರಿ ಶಕ್ತಿ ವಂದನ್ ಕಾಯ್ದೆಯಡಿ 2029ರ ಲೋಕಸಭೆ ಚುನಾವಣೆಯಲ್ಲಿ ಶೇ 33ರಷ್ಟು ಮಹಿಳೆಯರ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲಾಗುವುದು. ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಆರಿಸಿಕೊಂಡ ಮಾರ್ಗ ಸರಿಯಾದದ್ದಾಗಿದೆ ಎಂದು ಅವರು ಹೇಳಿದರು.