ಹೊಸದಿಲ್ಲಿ: ಸಿಪಿಐ ಯುವ ಮುಖಂಡ, ಜೆಎನ್ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಹಾಗೂ ಪಕ್ಷೇತರ ಶಾಸಕ ಜಿಗ್ನೇಶ್ ಮೆವಾನಿ ಇಂದು(ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಮ್ಮುಖದಲ್ಲಿ ಈ ಇಬ್ಬರು ಯುವ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದು, ಮುಂದಿನ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕನ್ನಯ್ಯ ಕುಮಾರ್ ಮತ್ತು ಜಿಗ್ನೇಶ್ ಮೆವಾನಿಯನ್ನು ಕಾಂಗ್ರೆಸ್ ಬರಮಾಡಿಕೊಂಡಿದೆ.
ಕಳೆದ ಒಂದೆರಡು ವಾರದಿಂದ ಕನ್ನಯ್ಯ ಮತ್ತು ಜಿಗ್ನೇಶ್ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಗುಲ್ಲೆದ್ದಿತ್ತು. ಇದಕ್ಕೆ ಸಂಬಂಧಿಸಿದಂತೆ ಈ ಇಬ್ಬರೂ ಯುವ ನಾಯಕರು ಸ್ಪಷ್ಟನೆ ನೀಡದಿದ್ದರೂ ಅವರಿಬ್ಬರ ಮೌನ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಕುರಿತು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದೀಗ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಮೂಲಕ ಈ ಎಲ್ಲಾ ಚರ್ಚೆಗಳಿಗೆ ಇಂದು ತೆರೆ ಬೀಳಲಿದೆ.