ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದು, ವೈಯಕ್ತಿಕ ಮಹತ್ವಾಕಾಂಕ್ಷೆಗಳನ್ನು ಬದಿಗೊತ್ತಿ ಪಕ್ಷವನ್ನು ಸಂಘಟಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ರೂಪಿಸಲು ಇಂದು ನಡೆದ ಪಕ್ಷದ ಉನ್ನತ ಮುಖಂಡರ ಸಭೆಯಲ್ಲಿ ಮಾತನಾಡಿದ ಸೋನಿಯಾ, ಕೇಂದ್ರ ಸರ್ಕಾರದಆಡಳಿತದ ವಿರುದ್ಧ ಹೋರಾಟವನ್ನು ಪಕ್ಷ ದುಪ್ಪಟ್ಟುಗೊಳಿಸಬೇಕು ಎಂದರು.
ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ರಾಹುಲ್ ಗಾಂಧಿ ಕೂಡಾ ಭಾಗವಹಿಸಿದ್ದರು.
ರಾಜ್ಯ ಮುಖಂಡರಲ್ಲಿ ಸ್ಪಷ್ಟತೆ ಹಾಗೂ ಒಗ್ಗಟ್ಟಿನ ಕೊರತೆಯನ್ನು ಪ್ರಸ್ತಾಪಿಸಿದ ಸೋನಿಯಾ, ಶಿಸ್ತು ಮತ್ತು ಒಗ್ಗಟ್ಟು ಅತ್ಯಂತ ಅಗತ್ಯವಿದೆ. ಪ್ರತಿಯೊಬ್ಬರು ಪಕ್ಷವನ್ನು ಸಂಘಟಿಸಬೇಕಾಗಿದೆ. ಇದಕ್ಕಾಗಿ ವೈಯ್ತಕಿಕ್ತ ಮಹತ್ವಕಾಂಕ್ಷೆಗಳನ್ನು ಬದಿಗೊತ್ತಬೇಕಾಗಿದೆ. ಇದರಲ್ಲಿ ವೈಯಕ್ತಿಕ ಮತ್ತು ಸಾಮೂಹಿಕ ಯಶಸ್ಸು ಅಡಗಿದೆ ಎಂದು ಹೇಳಿದರು.
ಮುಂದಿನ ವರ್ಷ ಆರಂಭದಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.